ಮತ್ತದೇ ಬೇಸರ, ಅದೇ ಸಂಜೆ, ಅದೇ ಏಕಾಂತ
ನಿನ್ನ ಜೊತೆಯಿಲ್ಲ,ದೆ ಮಾತಿಲ್ಲದೆ ಮನ ವಿಭ್ರಾಂತ
ಕಣ್ಣನೆ ದಣಿಸುವ ಈ ಪಡುವಣ ಬಾನ್ ಬಣ್ಣಗಳು,
ಮಣ್ಣನೆ ಹೊನ್ನಿನ ಹಣ್ಣಾಗಿಸುವೀ ಕಿರಣಗಳು,
ಹಚ್ಚನೆ ಹಸುರಿಗೆ ಹಸೆಯಿಡುತಿರುವೀ ಖಗ ಗಾನ
ಚಿನ್ನ, ನೀನಿಲ್ಲದೆ ಬಿಮ್ಮೆನ್ನುತಿದೆ ರಮ್ಯೋದ್ಯಾನ
ಆಸೆಗಳ ಹಿಂಡಿನ ತುಳಿತಕ್ಕೆ ಹೊಲ ನನ್ನೀದೇಹ
ಬರುವೆಯೋ, ಬಾರೆಯೋ ನೀನೆನ್ನುತಿದೆ ಆ ಸಂದೇಹ
ಮುತ್ತಿದಾಲಸ್ಯವ ಬಿಗಿ ಮೌನವ ಹೊಡೆದೋಡಿಸು ಬಾ
ಮತ್ತೆ ಆ ಸಮತೆಯ ಹಿರಿ ಬೇಲಿಯ ಸರಿ ನಿಲ್ಲಿಸು ಬಾ
ಬಣ್ಣ ಕಳೆದೊಡವೆಯ ತೆರ ಮಾಸುತಲಿದೆ ಸೂರ್ಯಾಸ್ತ
ನೋಡಗೋ, ತಿಮಿರದ ಬಲೆ ಬೀಸಿದ ಇರುಳಿನ ಬೆಸ್ತ
ವೆಚ್ಚವಾಗುತ್ತಿದೆ ಸವಿ ಚಣಗಳ ಧನ ದುಂದಾಗಿ;
ನಲಿವಿನ ಗಳಿಕೆಗೆ ಬಳಸವುಗಳನೊಂದೊಂದಾಗಿ
– ಪ್ರೊ.ಕೆ.ಎಸ್.ನಿಸಾರ್ ಅಹಮದ್